Thursday, January 16, 2025
spot_img

ತಮಿಳುನಾಡಿಗೆ ಕಾವೇರಿ ನೀರು:ಮಂಡ್ಯದಲ್ಲಿ ಪ್ರತಿಭಟನೆ

ಮಂಡ್ಯ, ಜುಲೈ ೧೨ : ತಮಿಳುನಾಡಿಗೆ ಪ್ರತಿದಿನ ನಾಡಿನ ಜಲಾಶಯಗಳಿಂದ ತಮಿಳುನಾಡಿಗೆ ಪ್ರತಿನಿತ್ಯ ಜುಲೈ 31ರವರೆಗೆ 1 ಟಿಎಂಸಿ ನೀರು ಬಿಡಲು ಆದೇಶಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ವಿರುದ್ಧ ಜಿಲ್ಲಾ ಹಿತರಕ್ಷಣಾ ಸಮಿತಿ ಸದಸ್ಯರು ರೈತರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರ ಜತೆಗೂಡಿ ನಗರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿ ಆಕ್ರೋಶ ಹೊರಹಾಕಿದರು.

ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ಕನ್ನಡಪರ, ಪ್ರಗತಿಪರ ಹಾಗೂ ರೈತ ಸಂಘಟನೆಗಳ ಕಾರ್ಯಕರ್ತರು ಸಂಜಯ್ ವೃತ್ತದಲ್ಲಿ ಜಮಾವಣೆಗೊಂಡು
ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದರು.

ಈ ವೇಳೆ ಕಾವೇರಿ ನೀರು ನಿಯಂತ್ರಣ ಸಮಿತಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು,
ಕಳೆದ ವರ್ಷ ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಎದುರಾಗಿ ಕೃಷ್ಣರಾಜಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಲಿಲ್ಲ ಇದರಿಂದ ರೈತರು ಬೆಳೆ ಬೆಳೆಯಲು ಸಾಧ್ಯವಾಗದೆ ಸಂಕಷ್ಟ ಎದುರಿಸುವಂತಾಯಿತು. ಜತೆಗೆ ಈ ವರ್ಷವೂ ಎರಡನೇ ಬೆಳೆ ಹಾಕಿಲ್ಲ, ಇದ್ದ ನೀರನ್ನು ತಮಿಳುನಾಡಿಗೆ ನಿರಂತರವಾಗಿ ಹರಿಸಲಾಯಿತು. ಇದೀಗ ಜಲಾಶಯಕ್ಕೆ ಸ್ವಲ್ಪ ಪ್ರಮಾಣದ ನೀರು ಹರಿದು ಬಂದಿದ್ದು, ಬೆಳೆ ಬೆಳೆಯಲು ಸರ್ಕಾರ ನೀರು ನೀಡಿಲ್ಲ. ಕೇವಲ ಕೆರೆ ಕಟ್ಟೆಗಳಿಗೆ ಮಾತ್ರ ನೀರು ಹರಿಸಲಾಗುತ್ತಿದೆ. ಇಂತಹ ಪರಿಸ್ಥಿತಿ ಇರುವಾಗ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಪ್ರತಿನಿತ್ಯ ಒಂದು ಟಿಎಂಸಿ ನೀರು ಬಿಡಲು ಆದೇಶ ಮಾಡಿರುವುದು ಅವೈಜ್ಞಾನಿಕ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಸಮಿತಿಯ ಆದೇಶವನ್ನು ಪಾಲನೆ ಮಾಡಬಾರದು ಎಂದರು.

ನೆರೆ ರಾಜ್ಯ ತಮಿಳುನಾಡಿಗೆ 19 ಟಿಎಂಸಿ ನೀರು ಬಿಟ್ಟರೆ ಇಲ್ಲಿನ ರೈತರ ಗತಿ ಏನು ಎಂದು ಆತಂಕ ವ್ಯಕ್ತಪಡಿಸಿದರು.

ಕೇಂದ್ರ ಸಚಿವರಾಗಿರುವ ಎಚ್ ಡಿ ಕುಮಾರಸ್ವಾಮಿಗೆ ವಾಸ್ತವ ಪರಿಸ್ಥಿತಿ ತಿಳಿದಿದೆ. ಇಲ್ಲಿನ ರೈತರ ಬವಣೆಯನ್ನು ಕಣ್ಣಾರೆ ಕಂಡಿದ್ದಾರೆ. ರೈತರು ಬೆಳೆ ಹಾಕದ ಪರಿಸ್ಥಿತಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ರೈತರಿಗೆ ಸಂಕಷ್ಟ ಪರಿಸ್ಥಿತಿಯಲ್ಲಿ ನ್ಯಾಯ ದೊರಕಿಸಿಕೊಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ತಮಿಳುನಾಡಿಗೆ ಪ್ರತಿನಿತ್ಯ ಒಂದು ಟಿಎಂಸಿ ನೀರನ್ನು ಜು.31ರವರೆಗೆ ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಮಾಡಿರುವುದು ಆವೈಜ್ಞಾನಿಕವಾಗಿದೆ. ಬರಗಾಲದ ಹಿನ್ನೆಲೆಯಲ್ಲಿ ರೈತರು ಬೆಳೆ ಬೆಳೆಯಲು ಸಾಧ್ಯವಾಗಲಿಲ್ಲ. ಈಗಲೂ ಬೆಳೆ ಬೆಳೆಯುವ ಪರಿಸ್ಥಿತಿಯಲ್ಲಿ ಇಲ್ಲ. ಜತೆಗೆ ಜಲಾಶಯಗಳು ಭರ್ತಿಯಾಗಿಲ್ಲ. ಆದರೂ ನೀರು ಹರಿಸಿ ಎಂದು ಆದೇಶ ಮಾಡಿರುವುದು ಸರಿಯಾದ ಕ್ರಮವಲ್ಲ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಇಂತಹ ರೈತ ವಿರೋಧಿ ಆದೇಶವನ್ನು ಒಪ್ಪಬಾರದು ಎಂದು ಆಗ್ರಹಿಸಿದರು.

ನದಿ ಜೋಡಣೆಯಿಂದ ಕರ್ನಾಟಕಕ್ಕೆ ಅನ್ಯಾಯ : ಗೋದಾವರಿ, ಕೃಷ್ಣ, ಕಾವೇರಿ, ಪೆನ್ನಾರ್ ನದಿ ಜೋಡಣೆ ಯಿಂದ ಕರ್ನಾಟಕ ರಾಜ್ಯದ ನೀರಿನ ಪಾಲು ಕೇವಲ 2.19 ಟಿಎಂಸಿ ಆದರೆ, ತೆಲಂಗಾಣ ಮಹಾರಾಷ್ಟ್ರ ರಾಜ್ಯಗಳಿಗೆ 40 ರಿಂದ 50 ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ. ನದಿ ಜೋಡಣೆಯಿಂದ ಎಲ್ಲಾ ರಾಜ್ಯಕ್ಕೂ ಸಮಾನವಾದ ನೀರಿನ ಪಾಲು ದೊರಕಬೇಕಿದೆ. ಆದರೆ ಕರ್ನಾಟಕ ರಾಜ್ಯಕ್ಕೆ ದೊಡ್ಡ ಮಟ್ಟದ ಅನ್ಯಾಯ ಆಗುತ್ತಿರುವುದರಿಂದ ಇಂತಹ ಯೋಜನೆಯನ್ನು ರಾಜ್ಯ ಸರ್ಕಾರ ಒಪ್ಪಬಾರದು ಎಂದು ಒತ್ತಾಯಿಸಿದರು.

ಕನ್ನಡ ಸೇನೆ ಜಿಲ್ಲಾಧ್ಯಕ್ಷ ಎಚ್ ಸಿ ಮಂಜುನಾಥ್,
ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನಂದ ಜಯರಾಮ್, ರೈತ ಸಂಘದ ಇಂಡುವಾಳು ಚಂದ್ರಶೇಖರ್, ಮುದ್ದೇಗೌಡ, ಶಿವಳ್ಳಿ ಚಂದ್ರಶೇಖರ್, ಮಲ್ಲನಾಯಕನಕಟ್ಟೆ ವಿಜಯ್ ಕುಮಾರ್, ಪಿ.ಜಿ.ನಾಗೇಂದ್ರ, ಸತ್ಯಭಾಮ, ಗೌರಮ್ಮ, ಕಮಲಮ್ಮ, ಬಿಜೆಪಿ ವಕ್ತಾರ ಸಿ.ಟಿ ಮಂಜುನಾಥ್, ಎಂ.ಎಲ್.ತುಳಸೀದರ್ ಇತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!