ಮಂಡ್ಯ : ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ನಾಲ್ಕನೇ ವಾರ್ಷಿಕ ಘಟಿಕೋತ್ಸವವನ್ನು ಜೂನ್ ರಂದು ಬೆಳಗ್ಗೆ 10.30ಕ್ಕೆ ವಿಶ್ವವಿದ್ಯಾಲಯ ಆವರಣದ ಬಾಲಗಂಗಾಧರನಾಥ ಸ್ವಾಮಿಜಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವ ವಿದ್ಯಾಲಯದ ಕುಲಸಚಿವ ಡಾ.ಎ..ಎ.ಶೇಖರ್ ತಿಳಿಸಿದರು.
ಆದಿಚುಂಚನಗಿರಿ ವಿಶ್ವವಿದ್ಯಾಲಯ ವನ್ನು ಆದಿಚುಂಚನಗಿರಿ ವಿಶ್ವವಿದ್ಯಾಲಯ ಕಾಯಿದೆ 2012 (ಕರ್ನಾಟಕ ಅಧಿನಿಯಮ ನಂ.18 2013) ಅಡಿಯಲ್ಲಿ ಸ್ಥಾಪಿಸಲಾಗಿದ್ದು, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಾಲಗಂಗಾಧರ ನಗರದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ವಿಶ್ವವಿದ್ಯಾನಿಲಯವು ಫೆಬ್ರವರಿ 2018 ರಿಂದ ಕಾರ್ಯ ನಿರ್ವಹಿಸಲು ಪ್ರಾರಂಭಿಸಿತು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಸ್ತುತ ಸುಮಾರು 5594 ವಿದ್ಯಾರ್ಥಿಗಳು ವಿವಿಧ ಕಾರ್ಯಕ್ರಮಗಳನ್ನು ಅಧ್ಯಯನ ಮಾಡುತ್ತಿದ್ದಾರೆ ಎಂದರು.
ಅಂದಿನ ಘಟಿಕೋತ್ಸವದ ಕಾರ್ಯಕ್ರಮದಲ್ಲಿ
ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ಗೌರವಾನ್ವಿತ ಕುಲಪತಿಗಳಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ದಿವ್ಯ ಸಾನಿದ್ಯ ಮತ್ತು ಆಶೀರ್ವಚನದ ಮೂಲಕ ಆಶೀರ್ವಚನ ನೀಡಲಿದ್ದಾರೆ.
ಘಟಿಕೋತ್ಸವದ ಅಧ್ಯಕ್ಷತೆಯನ್ನು ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ ಹಾಗೂ ವಿಶ್ವವಿದ್ಯಾಲಯದ ಪರ- ಸಂದರ್ಶಕರಾದ ಡಾ. ಎಂ ಸಿ ಸುಧಾಕರ್ ವಹಿಸಲಿದ್ದಾರೆ. ಡಾ.ಎ.ಎನ್.ಕಿರಣ್ ಕುಮಾರ್, ಅಧ್ಯಕ್ಷರು, ಭೌತಿಕ ಸಂಶೋಧನಾ ಪ್ರಯೋಗಾಲಯ ನಿರ್ವಹಣಾ ಮಂಡಳಿ, ಸದಸ್ಯರು – ಬಾಹ್ಯಾಕಾಶ ಆಯೋಗ, ಭಾರತ ಸರ್ಕಾರ ಮತ್ತು ಮಾಜಿ ಅಧ್ಯಕ್ಷರು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಘಟಿಕೋತ್ಸವ ಭಾಷಣವನ್ನು ನೀಡಲಿದ್ದಾರೆ ಎಂದು ವಿವರಿಸಿದರು.
ನಾಲ್ಕನೇ ವಾರ್ಷಿಕ ಘಟಿಕೋತ್ಸವದಲ್ಲಿ 1,265 ಅಭ್ಯರ್ಥಿಗಳಿಗೆ ವಿವಿಧ ಪದವಿಗಳನ್ನು ನೀಡಲಾಗುವುದು. 5 ಅಭ್ಯರ್ಥಿಗಳಿಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ (ಮೂವರು ಫಾರ್ಮಸಿ ನಿಕಾಯ ಮತ್ತು ಇಬ್ಬರು ಇಂಜಿನಿಯರಿಂಗ್, ಮ್ಯಾನೇಜ್ಮೆಂಟ್ ಮತ್ತು ಟೆಕ್ನಾಲಜಿಯ ನಿಕಾಯ) ನೀಡಲಾಗುತ್ತದೆ ಎಂದು ತಿಳಿಸಿದರು.
ಆದಿಚುಂಚನಗಿರಿ ವಿಶ್ವವಿದ್ಯಾಲಯವು ಪ್ರಸ್ತುತ 7 ಘಟಕ ಕಾಲೇಜುಗಳನ್ನು ಹೊಂದಿದ್ದು, ವೈದ್ಯಕೀಯ, ಇಂಜನಿಯರಿಂಗ್ ಕಾಲೇಜು ಹಾಗೂ ವಿವಿಧ ಸ್ನಾತಕ, ಸ್ನಾತಕೋತ್ತರ ಮತ್ತು ಪಿಎಚ್ ಡಿ ಪದವಿಗಳನ್ನು ನೀಡುತ್ತಿದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲ ಸಚಿವ ಡಾ.ಪ್ರಾಣೇಶ್ ಗುಡೂರು, ಡಾ.ಸುಬ್ರಾಯ ಇತರರಿದ್ದರು.