*ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಕೆರೆಯನ್ನು ಸಂರಕ್ಷಿಸುವುದು ತುಂಬಾ ಮುಖ್ಯ*
*ಅಧಿಕಾರಿಗಳು ತಿಂಗಳಿಗೆ 5 ಒತ್ತುವರಿ ಕೆರೆಗಳನ್ನು ತೆರವುಗೊಳಿಸುವಂತೆ ಕ್ರಮ ವಹಿಸಿ*
*- ಡಾ. ಕುಮಾರ*
ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಎಚ್.ಎಲ್.ಬಿ.ಸಿ, ಕಾವೇರಿ ನೀರಾವರಿ ನಿಗಮ ನಿಯಮಿತ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಕೆರೆಯನ್ನು ಸಂರಕ್ಷಿಸಬೇಕು. ನಿಯಮಿತವಾಗಿ ಕೆರೆಗಳ ಪರಿಶೀಲನೆ ನಡೆಸಿ ಒತ್ತುವರಿಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೆರೆಗಳ ಒತ್ತುವರಿ ತೆರವುಗೊಳಿಸುವ ಸಂಬಂಧದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿನ ಒತ್ತುವರಿ ಕೆರೆಗಳನ್ನು ಪಟ್ಟಿ ಮಾಡಿ ತಿಂಗಳಗೆ 05 ಒತ್ತುವರಿ ಕೆರೆಗಳನ್ನು ತೆರವುಗೊಳಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿನ ನೀರು ಇರುವ ಕೆರೆಗಳನ್ನು ಗುರುತಿಸಿ ಕಡ್ಡಾಯವಾಗಿ ನೀರಿನ ಗುಣಮಟ್ಟದ ಪರಿಶೀಲನಾ ಪರೀಕ್ಷೆ ನಡೆಸಬೇಕು ಹಾಗೂ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಕೆರೆಗಳ ನೀರಿನ ಸಂರಕ್ಷಣೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಯಾವುದೇ ಕೆರೆಯ ಒತ್ತುವರಿ ಸಂಬಂಧ ಕುರಿತು ಸಾರ್ವಜನಿಕ ದೂರು ಬಂದಲ್ಲಿ ಪ್ರಥಮ ಆದ್ಯತೆ ಮೇರೆಗೆ ದೂರುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಎಚ್.ಎಲ್.ಬಿ.ಸಿ, ಕಾವೇರಿ ನೀರಾವರಿ ನಿಗಮ ನಿಯಮಿತ ಅಧಿಕಾರಿಗಳು ರಾಜಕಾಲುವೆ ಹಾಗೂ ನಾಲೆಗಳ ಒತ್ತುವರಿಯಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳು ಜವಾಬ್ದಾರಿಯಾಗಿರುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಆನಂದ್ ಎಂ,ಉಪ ವಿಭಾಗಧಿಕಾರಿ ಶಿವಮೂರ್ತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


