ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಡಾ.ವೆಂಕಟೇಶ್ ವಿರುದ್ದ ಕೇಳಿ ಬಂದಿರುವ ಹಣ ದುರುಪಯೋಗದ ದೂರುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಮತ್ತೊಂದು ತಂಡವನ್ನು ರಚಿಸಿ ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇದಕ್ಕೂ ಮೊದಲು ತನಿಖಾ ತಂಡವನ್ನು ರಚಿಸಲಾಗಿತ್ತು, ಆ ತಂಡ ನಾಗಮಂಗಲ ಪಟ್ಟಣದಲ್ಲಿ ಆರೋಪಿತರೊಂದಿಗೆ ಬಾಡೂಟದಲ್ಲಿ ಪಾಲ್ಗೊಂಡಿದ್ದು ಎಂಬ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಡಿಹೆಚ್ಓ ಅವರು ಮತ್ತೊಂದು ತನಿಖಾ ತಂಡವನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.
ನಿಕಟಪೂರ್ವ ಆಡಳಿತ ವೈದ್ಯಾಧಿಕಾರಿ ಮತ್ತು ಹಾಲಿ ನಾಗಮಂಗಲ ಸಾರ್ವಜನಿಕ ಆಸ್ಪತ್ರೆ ಕೀಲು ಮೂಳೆ ತಜ್ಞ ಕಳೆದ 2 ವರ್ಷಗಳಿಂದ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿದ್ದ ಅವಧಿಯಲ್ಲಿ ಆರೋಗ್ಯ ರಕ್ಷಾ ಸಮಿತಿ ಹಾಗೂ ಆಯುಷ್ಮಾನ್ ಯೋಜನೆಗಳ ಹಣ ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ತನಿಖೆ ನಡೆಸಿ ಸ್ಪಷ್ಟ ಅಭಿಪ್ರಾಯದೊಂದಿಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ.
ಹೊಸ ತನಿಖಾ ತಂಡದಲ್ಲಿ ಮಂಡ್ಯ ಜಿಲ್ಲಾ ಸರ್ವೇಕ್ಷಣಾಧಿಕಾರಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ, ಡಿಹೆಚ್ಓ ಕಚೇರಿ ಅಧೀಕ್ಷಕ ಪ್ರಕಾಶ್ ಎನ್, ಪ್ರಥಮ ದರ್ಜೆ ಸಹಾಯಕ ವಿನಯ್, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ರಮ್ಯ ಇದ್ದಾರೆ.
ನಾಗಮಂಗಲ ತಾಲ್ಲೂಕು ಆಸ್ಪತ್ರೆಯಲ್ಲಿ ಎಬಿಆರ್’ಕೆ ಮತ್ತು ಆರೋಗ್ಯ ರಕ್ಷಾ ನಿಧಿ ದುರ್ಬಳಕೆ ಮಾಡಿಕೊಂಡಿರುವ ಕುರಿತು ಕಳೆದ ನ.29ರಂದು ಕರುನಾಡ ಸೇವಕರು ಸಂಘಟನೆಯ ಮೈಸೂರು ವಿಭಾಗೀಯ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ದೂರು ನೀಡಿದ್ದರು.